
ಪೌರ ನೌಕರರ ಸೇವೆ ಖಾಯಮಾತಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟೀಸ್
ಪೌರ ನೌಕರರ ಸೇವೆ ಖಾಯಮಾತಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟೀಸ್
ಪೌರ ನೌಕರರ ಸೇವೆ ಖಾಯಂಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠದ ಆದೇಶ ಜಾರಿಗೊಳಿಸದ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಪೌರ ಕಾರ್ಮಿಕರು, ವಿವಿಧ ಸಂಘಟನೆಗಳು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ವಿವಿಧ ಇಲಾಖಾ ಮುಖ್ಯ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯ ಮತ್ತು ನ್ಯಾಯಮೂರ್ತಿ ಎಂಐ ಅರುಣ್ ಅವರಿಂದ ವಿಭಾಗಿಯ ನ್ಯಾಯ ಪೀಠ ಈ ನೋಟಿಸ್ ಜಾರಿಗೊಳಿಸಿದೆ
ಹಲವು ದಶಕಗಳಿಂದ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ನೌಕರರು ಮತ್ತು ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ನ್ಯಾಯಾಲಯ ಹೊರಡಿಸಿರುವ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕಾಗಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹೈಕೋರ್ಟ್ ನಲ್ಲಿ ದಾಖಲಿಸಲಾಗಿದೆ. ಈ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
2023ರ ಜೂನ್ 19ರಂದು ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠ ಹೊರಡಿಸಿರುವ ಆದೇಶದ ಅನ್ವಯ ರಾಜ್ಯ ಸರ್ಕಾರ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಿಲ್ಲ. ಈ ಮೂಲಕ ನ್ಯಾಯಾಂಗ ನಿಂದನೆಯನ್ನು ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ನಿವೃತ್ತ ಪೌರ ನೌಕರರು ಮತ್ತು ಪೌರಕಾರ್ಮಿಕರ ಸಂಘ ಹಾಗೂ ವಿವಿಧ ಸಂಘಟನೆಗಳು ಹೈಕೋರ್ಟ್ ಮೊರೆ ಹೋಗಿದ್ದರು. ಅವರು ಸಲ್ಲಿಸಿರುವ ನ್ಯಾಯಾಂಗ ನಿಂದನೆಯ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ನ್ಯಾಯ ಪೀಠ ಈ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಸಿಬ್ಬಂದಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪೌರಾಡಳಿತ ಇಲಾಖೆ ನಿರ್ದೇಶಕರನ್ನು ಪಕ್ಷಕರರನ್ನಾಗಿ ಮಾಡಲಾಗಿದ್ದು ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ರಾಜ್ಯದ ವಿವಿಧ ನಗರ ಸಭೆ ಮತ್ತು ಪುರಸಭೆಗಳಲ್ಲಿ ಎರಡು ಮೂರು ದಶಕಗಳಿಂದ ಕೆಲಸ ಮಾಡುತ್ತಿರುವ ಪಂಪ್ ಆಪರೇಟರ್ಸ್, ಬಿಲ್ ಕಲೆಕ್ಟರ್, ದ್ವಿತೀಯ ದರ್ಜೆ ಸಹಾಯಕರು, ಟೈಪಿಸ್ಟ್, ದಫೇದಾರ್, ಕಿರಿಯ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ನೌಕರರು, ರಾಜ್ಯ ನಿವೃತ್ತ ಪೌರ ನೌಕರರು ಮತ್ತು ಪೌರಕಾರ್ಮಿಕರ ಸಂಘಟನೆಗಳು 2023ರಲ್ಲಿ ಹೈಕೋರ್ಟಿಗೆ ಈ ಅರ್ಜಿಯನ್ನು ಸಲ್ಲಿಸಿದರು.
ನಾವು ಕಳೆದ ಎರಡು ಮೂರು ದಶಕಗಳಿಂದ ಸರ್ಕಾರದ ಸೇವೆ ಸಲ್ಲಿಸುತ್ತೇವೆ. ಆದರೂ, ತಮ್ಮ ಸೇವೆಯನ್ನು ಸರಕಾರ ಖಾಯಂಗೊಳಿಸಿಲ್ಲ "ಪ್ರೇಮ್ ಸಿಂಗ್ ವರ್ಸಸ್ ಉತ್ತರಪ್ರದೇಶ ಪ್ರಕರಣ" ಹಾಗೂ "ಕರ್ನಾಟಕ ಸರಕಾರ ವರ್ಸಸ್ ಉಮಾದೇವಿ ಪ್ರಕರಣ"ದಲ್ಲಿ ಸುಪ್ರೀಂಕೋರ್ಟ್ ಹೊರಡಿಸಿರುವ ತೀರ್ಪಿನ ಅನ್ವಯ ತಮ್ಮ ಸೇವೆಯನ್ನು ಖಾಯಂ ಗೊಳಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸಂಘಟನೆಗಳು ಈ ಅರ್ಜಿಯಲ್ಲಿ ಮನವಿ ಮಾಡಿದ್ದರು.
ಈ ಅರ್ಜಿಯನ್ನು 2023ರ ಜೂನ್ 19ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಈ ಎಸ್ ಇಂದಿರೇಶ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಅರ್ಜಿದಾರರ ನೌಕರರನ್ನು ಸೇವಾ ಕಾಯ ವಿಚಾರದಲ್ಲಿ ನೌಕರರು ಕಾಯಂ ನಿರ್ವಹಿಸುತ್ತಿರುವ ನಗರ ಮತ್ತು ಪುರಸಭೆ ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕಳುಹಿಸಿರುವ ವರದಿಯನ್ನು ಪೌರಾಡಳಿತ ಇಲಾಖೆ ನಿರ್ದೇಶಕರು ಪರಿಗಣಿಸಬೇಕು ಎಂದುದ ತಿಳಿಸಿತ್ತು.
ಅರ್ಜಿದಾರ ನೌಕರರು ಮತ್ತೊಮ್ಮೆ ಅಗತ್ಯ ದಾಖಲೆಗಳು ಮತ್ತು ಸುಪ್ರೀಂಕೋರ್ಟಿನ ತೀರ್ಪಿನ ಪ್ರತಿಯ ಜೊತೆಗೆ ತಮ್ಮ ಸೇವೆ ಕಾಯಂಗೊಳಿಸುವಂತೆ ಕೋರಿ ಕರ್ನಾಟಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿತ್ತು. ಇದೀಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ನೌಕರರು ಏಕ ಸದಸ್ಯ ನ್ಯಾಯ ಪೀಠದ ಆದೇಶದಂತೆ ತಾವು ಮನವಿ ಸಲ್ಲಿಸಿದ್ದರೂ, ಅದನ್ನು ಪರಿಗಣಿಸಿ ಈವರೆಗೂ ತಮ್ಮ ಸೇವೆಯನ್ನು ಕಾಯಂಗೊಳಿಸಿಲ್ಲ. ಆದ್ದರಿಂದ, ತಮ್ಮ ಸೇವೆ ಖಾಯಂಗೊಳಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿಕೊಂಡಿದ್ದರು.